ತಪ್ಪು ತಿಳುವಳಿಕೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ ಮತ್ತು ದೌರ್ಜನ್ಯಗಳು ನಡೆಯುತ್ತಿವೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಮಹಾರಾಷ್ಟ್ರದ ಅಮರಾವತಿಯಲ್ಲಿರುವ ‘ಮಹಾನುಭವ ಆಶ್ರಮ’ದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬರಿಗೂ ಧರ್ಮ ಮುಖ್ಯವಾಗಿದ್ದು, ಅದನ್ನು ತಪ್ಪದೆ ಪಾಲಿಸಬೇಕು’ ಎಂದು ಹೇಳಿದ್ದಾರೆ.

ಧರ್ಮದ ಕುರಿತಾದ ಅಸಮರ್ಪಕ ಮತ್ತು ಅಪೂರ್ಣ ಜ್ಞಾನವು ಅಧರ್ಮಕ್ಕೆ ಕಾರಣವಾಗುತ್ತದೆ. ಧರ್ಮದ ಹೆಸರಿನಲ್ಲಿ ಪ್ರಪಂಚದಾದ್ಯಂತ ನಡೆಯುತ್ತಿರುವ ಎಲ್ಲಾ ರೀತಿಯ ಶೋಷಣೆ ಮತ್ತು ದೌರ್ಜನ್ಯಗಳು ತಿಳುವಳಿಕೆ ಕೊರತೆಯಿಂದಲೇ ಹೊರತು ಬೇರೆನು ಕಾರಣವಲ್ಲ’ ಎಂದು ಭಾಗವತ್ ಪ್ರತಿಪಾದಿಸಿದ್ದಾರೆ.

ಧರ್ಮವು ಯಾವಾಗಲೂ ಅಸ್ತಿತ್ವದಲ್ಲಿರುತ್ತದೆ. ಎಲ್ಲವೂ ಅದರ ಪ್ರಕಾರವೇ ನಡೆಯುತ್ತಿರುತ್ತದೆ. ಅದಕ್ಕಾಗಿಯೇ ಅದನ್ನು ‘ಸನಾತನ’ ಎಂದು ಕರೆಯಲಾಗುತ್ತದೆ. ಧರ್ಮದ ನಡವಳಿಕೆಯು ಧರ್ಮದ ರಕ್ಷಣೆಯಾಗಿದೆ ಎಂದು ಅವರು ವಿವರಿಸಿದ್ದಾರೆ.

ಈಚೆಗೆ ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಭಾಗವತ್, ‘ದೇಶದಲ್ಲಿ ಹೊಸದಾಗಿ ಮಂದಿರ – ಮಸೀದಿಗಳ ವಿವಾದಗಳನ್ನು ಹುಟ್ಟುಹಾಕುತ್ತಿದೆ’ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದರು.

ಕೆಲವು ವ್ಯಕ್ತಿಗಳು, ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ನಂತರ, ಅಂತಹ ವಿವಾದಗಳನ್ನು ಕೆರಳಿಸುವ ಮೂಲಕ ಹಿಂದೂಗಳ ನಾಯಕರಾಗಬಹುದೆಂದು ಭಾವಿಸಿದ್ದಾರೆ. ಆದರೆ, ಅದು ಸ್ವೀಕಾರಾರ್ಹವಲ್ಲ’ ಎಂದೂ ಅವರು ಹರಿಹಾಯ್ದಿದ್ದರು.

‘ಭಾರತ – ವಿಶ್ವಗುರು’ ವಿಷಯದ ಬಗ್ಗೆ ಉಪನ್ಯಾಸ ನೀಡಿದ್ದ ಅವರು, ಎಲ್ಲರನ್ನೂ ಒಳಗೊಳ್ಳುವ ಸಮಾಜದ ಅಗತ್ಯವಿದೆ. ದೇಶವು ಸಾಮರಸ್ಯದಿಂದ ಬದುಕಬಹುದು ಎಂಬುದನ್ನು ಜಗತ್ತಿಗೆ ತೋರಿಸ ಬೇಕಾಗಿದೆ ಎಂದಿದ್ದರು.

ಭಾರತೀಯ ಸಮಾಜದ ಬಹುತ್ವವನ್ನು ಎತ್ತಿ ತೋರಿಸಿದ ಅವರು, ‘ರಾಮಕೃಷ್ಣ ಮಿಷನ್‌ನಲ್ಲಿ ಕ್ರಿಸ್‌ಮಸ್ ಆಚರಿಸಲಾಗುತ್ತದೆ. ನಾವು ಹಿಂದೂಗಳಾಗಿರುವುದರಿಂದ ಮಾತ್ರ ಇದನ್ನೆಲ್ಲ ವನ್ನು ಮಾಡುತ್ತಿದ್ದೇವೆ’ ಎಂದು ಹೇಳಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!