
ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಗ್ರಾಮ ಪಂಚಾಯತ್ ಬಳಿಯ ಕೆ.ಎಸ್. ರಾವ್ ನಗರ ತಿರುವಿನ ರಸ್ತೆಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರೆ ಮಮತಾ ಬಂಗೇರ (42) ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಟೆಂಪೋ ರಿಕ್ಷಾವೊಂದು ಹಿಂಬದಿಯಿಂದ ಬಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಹಿಂದೆ ಮುಂಬಯಿಯಲ್ಲಿ ವಾಸವಿದ್ದ ಅವರು ಕಳೆದ ಕೆಲವು ಸಮಯಗಳಿಂದ ಶಿಮಂತೂರು ಬಳಿ ನೂತನವಾಗಿ ಮನೆ ನಿರ್ಮಿಸಿಕೊಂಡು ತಮ್ಮ ಪುತ್ರಿಯ ಜತೆ ವಾಸವಾಗಿದ್ದರು. ಮಹಿಳಾ ಸ್ವಸಹಾಯ ತಂಡ ಹಾಗೂ ಇತರ ಸಾಮಾಜಿಕ ಸಂಘಟನೆಯಲ್ಲಿ ಅವರು ಸಕ್ರಿಯರಾಗಿದ್ದರು.
ಅವರ ಪತಿ ಮೈಸೂರಿನಲ್ಲಿ ಸ್ವಂತ ಉದ್ಯಮ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮಗಳು ನಾಲ್ಕನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ. ಮಂಗಳೂರು ಉತ್ತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
