
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ನಗದು ರಾಶಿ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆಂತರಿಕ ತನಿಖೆ ಆರಂಭಿಸಿದೆ. ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರಿಂದಲೂ ಸುಪ್ರೀಂ ಕೋರ್ಟ್ ವರದಿ ಕೇಳಿದೆ.
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಲೆಕ್ಕಕ್ಕೆ ಸಿಗದ ಬೃಹತ್ ನಗದು ರಾಶಿ ಪತ್ತೆಯಾಗಿದ್ದು, ಶುಕ್ರವಾರ ಸುಪ್ರೀಂ ಕೋರ್ಟ್ ಅವರ ವಿರುದ್ಧ ಆಂತರಿಕ ತನಿಖೆ ಆರಂಭಿಸಿದೆ. ಅಂದಾಜು 15 ಕೋಟಿ ಮೌಲ್ಯದ ನಗದು ಪತ್ತೆಯಾಗಿದೆ ಎಂದು ವರದಿಯಾಗಿದೆ. ಈ ನಡುವೆ ಯಶವಂತ್ ವರ್ಮಾ ಅವರನ್ನು ದೆಹಲಿ ಹೈಕೋರ್ಟ್ ನಿಂದ ಅಲಹಾಬಾದ್ ಹೈಕೋರ್ಟ್ ಗೆ ವರ್ಗಾವಣೆ ಮಾಡಲಾಗಿದೆ. ಆದರೆ, ಈ ಕ್ರಮಕ್ಕೆ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್ ಆಕ್ರೋಶ ವ್ಯಕ್ತಪಡಿಸಿದ್ದು, ಇಂಥ ಭ್ರಷ್ಟಾಚಾರ ಸಹಿಸಲು ಸಾಧ್ಯವಿಲ್ಲ. ಅಲಹಾಬಾದ್ ಹೈಕೋರ್ಟ್ ಡಸ್ಟ್ ಬಿನ್ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಕಳೆದ ವಾರ ದೆಹಲಿಯ ನ್ಯಾಯಮೂರ್ತಿ ನಿವಾಸಕ್ಕೆ ಬೆಂಕಿ ಬಿದ್ದಾಗ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದರು. ಈ ವೇಳೆ ಅವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ.
ಲೆಕ್ಕಕ್ಕೆ ಸಿಗದ ಹಣದ ಮಾಹಿತಿ ಬಂದ ನಂತರ, ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್ಗೆ ಮರಳಿ ವರ್ಗಾಯಿಸಲು ನಿರ್ಧರಿಸಿತು. 2021ರ ಅಕ್ಟೋಬರ್ನಲ್ಲಿ ಅವರು ಅಲಹಾಬಾದ್ ಹೈಕೋರ್ಟ್ನಿಂದ ದೆಹಲಿ ಹೈಕೋರ್ಟ್ಗೆ ವರ್ಗಾವಣೆ ಆಗಿದ್ದರು.
ಶುಕ್ರವಾರ ಬೆಳಿಗ್ಗೆ ನಡೆದ ಎಲ್ಲಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ದಂಡನಾತ್ಮಕ ವರ್ಗಾವಣೆ ಸಾಕಾಗುವುದಿಲ್ಲ ಮತ್ತು ನ್ಯಾಯಾಧೀಶರ ವಿರುದ್ಧ ಕೆಲವು ಕಾಂಕ್ರೀಟ್ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಸೂಚಿಸಲಾಯಿತು ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.
ನಂತರ ಸುಪ್ರೀಂ ಕೋರ್ಟ್ ಆಂತರಿಕ ತನಿಖೆಗೆ ಸರ್ವಾನುಮತದಿಂದ ಒಪ್ಪಿಗೆ ನೀಡಿತು, ವರ್ಗಾವಣೆ ಇದರಲ್ಲಿ ಮೊದಲ ಹೆಜ್ಜೆಯಾಗಿದೆ. ಇದರ ನಡುವ, ನ್ಯಾಯಮೂರ್ತಿ ವರ್ಮಾ ಇಂದು ನ್ಯಾಯಾಲಯಕ್ಕೆ ಹಾಜರಾಗಲಿಲ್ಲ ಮತ್ತು ಅವರ ನ್ಯಾಯಾಲಯದ ಸಿಬ್ಬಂದಿ ಅವರು ರಜೆಯಲ್ಲಿದ್ದಾರೆ ಎಂದು ಮುಕ್ತ ನ್ಯಾಯಾಲಯದಲ್ಲಿ ತಿಳಿಸಿದ್ದಾರೆ.






