
ಧರ್ಮಸ್ಥಳ(Dharmasthala) ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ(Dr D Veerendra Heggade)ಯವರ ವಿರುದ್ಧ ಅವಹೇಳನಕಾರಿ ಹೇಳಿಕೆ(Defamatory Remarks) ಹಾಗೂ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ (City Civil Court, Bangalore) ಜಾನ್ ಡೋ ಆದೇಶ (John DoeOrder) ಹೊರಡಿಸಿದೆ.
ಸಂಬಂಧ ಹಿರಿಯ ನ್ಯಾಯವಾದಿ ಎಸ್. ರಾಜಶೇಖರ್ ಹಿಳಿಯಾರು ವಾದ ಮಂಡಿಸಿದ್ದು, ದಾವೆಯನ್ನು ವಿಚಾರಣೆ ನಡೆಸಿದ ಸಿಸಿಎಚ್-11ನೇ ನ್ಯಾಯಾಲಯ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಮಾಧ್ಯಮಗಳ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಹಾಗೂ ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಸೂಚಿಸಿದೆ
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಜಾನ್ ಡೋ ಆದೇಶದ ಅನ್ವಯ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಡೆಸುತ್ತಿರುವಂತಹ ಸಂಸ್ಥೆಗಳು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆಯಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್, ಯೂ-ಟ್ಯೂಬ್, ಟಿ.ವಿ.ಚಾನೆಲ್ ಹಾಗೂ ಇತರೆ ಯಾವುದೇ ರೀತಿಯ ಮಾಧ್ಯಮ ಪ್ರಕಾರಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ವರದಿ ಅಥವಾ ಮಾತನಾಡಬಾರದು ಎಂದು ನಿರ್ಬಂಧ ಹೇರಿದೆ.
ಏನಿದು ಜಾನ್ ಡೋ ಆದೇಶ..?
ಅಜ್ಞಾತ ಅಥವಾ ಪತ್ತೆಯಾಗದ ವ್ಯಕ್ತಿಗಳ ವಿರುದ್ಧ ಜಾರಿಯಾಗುವ ಕಾನೂನು ಕ್ರಮ ಇದಾಗಿದ್ದು, ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆಯಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್, ಯೂ-ಟ್ಯೂಬ್ ಹಾಗೂ ದೃಶ್ಯ ಮಾಧ್ಯಮ ಸೇರಿದಂತೆ ಮತ್ತಿತ್ತರ ಮಾಧ್ಯಮಗಳ ಮೂಲಕ ನೀಡಲಾಗುತ್ತಿರುವ ಅವಹೇಳನಕಾರಿ ಹೇಳಿಕೆ ಮತ್ತು ಅಪಪ್ರಚಾರಕ್ಕೆ ಕಡಿವಾಣ ಹಾಕಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ತೇಜೋವಧೆ ಮಾಡುವುದನ್ನು ತಡೆಯಲು ಈ ಆದೇಶ ಬಹಳ ಪ್ರಮುಖವಾಗಿದೆ.
ಆದೇಶ ಉಲ್ಲಂಘಿಸಿದ್ದರೆ ಕಠಿಣ ಕ್ರಮ ಜಾರಿ
ನ್ಯಾಯಾಲಯ ಹೊರಡಿಸಿರುವ ಈ ಆದೇಶವನ್ನು ಉಲ್ಲಂಘಿಸಿದ್ದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೇ ಸಾಮಾಜಿಕ ಜಾಲತಾಣಗಳು ಮತ್ತು ಇತರೆ ಮಾಧ್ಯಮ ಸಂಸ್ಥೆಗಳು ಮಾಡಿರುವ ಅಥವಾ ಮಾಡುವ ಅವಹೇಳನಕಾರಿ ವರದಿಗಳ ಮೇಲೆ ನಿರ್ಬಂಧನೆ ಹೇರಿ ಕೂಡಲೇ ಅಳಿಸಿ ಹಾಕುವಂತೆ ಆದೇಶಿಸಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳ ಹಾಗೂ ಅವರ ಕುಟುಂಬದ ವಿರುದ್ಧ ಮಾಡುತ್ತಿರುವ ಅಪಪ್ರಚಾರ ತಡೆಯುವಲ್ಲಿ ಈ ಆದೇಶ ಪ್ರಮುಖ ಪಾತ್ರವಹಿಸಲಿದೆ.






