Posted by vidyamaana on 2023-08-18 08:29:00 |
ಬೆಳ್ತಂಗಡಿ: ರೋಗಿಯೊಬ್ಬರನ್ನು ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.
ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
Posted by Vidyamaana on 2023-07-07 14:08:27 |
ಪುತ್ತೂರು: ಇಲ್ಲಿನ ಸಹಾಯಕ ಆಯುಕ್ತರಾಗಿದ್ದ ಗಿರೀಶ್ ನಂದನ್ ವರ್ಗಾವಣೆಗೊಂಡಿದ್ದಾರೆ.
ತೆರವಾಗಲಿರುವ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ.
ಗಿರೀಶ್ ನಂದನ್ ಅವರು ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧಿನಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
Posted by Vidyamaana on 2023-04-10 05:39:52 |
ಬೆಳ್ತಂಗಡಿ: ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ ಗಾಯಗೊಂಡಿದ್ದ ಗಾಯಾಳುಗಳ ಪೈಕಿ ಸರೋಜಿನಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಯ ಕೊಪ್ಪ ಎಂಬಲ್ಲಿ ಮರಣದ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ವೇಳೆ ರವಿವಾರ ರಾತ್ರಿ ಈ ಅವಘಡ ನಡೆದಿತ್ತು.ಕಾರಿನಲ್ಲಿ ಪ್ರಯಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ, ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್, ಸಾಕ್ಷಿ, ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ ಹಾಗೂ ಕಾರು ಚಾಲಕರಾಗಿದ್ದ ಅರುಣ್ ಗಾಯಗೊಂಡಿದ್ದರು. ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆ, ಉಜಿರೆಯ ಎಸ್ಡಿಎಂ ಆಸ್ಪತ್ರೆ ಮತ್ತು ಬೆನಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಈ ಪೈಕಿ ಸರೋಜಿನಿ ಶೆಟ್ಟಿ ಮತ್ತು ಪೂರ್ಣಿಮಾ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಳಿದವರು ಉಜಿರೆ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದಾರೆ.
Posted by Vidyamaana on 2023-08-01 06:14:32 |
ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು.
ಇದೇ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕೂಡಾ ಆಗಮಿಸಿದ್ದಾರೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ವಸಂತ ಬಂಗೇರ,ಜಿಲ್ಲಾಧಿಕಾರಿ ಮುಲ್ಫ್ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಎಸ್ಪಿ ರಿಷ್ಯಂತ್, ಡಿಸಿಪಿ ಅನ್ಯುಕುಮಾರ್, ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು
Posted by Vidyamaana on 2024-01-20 09:37:11 |
ಮೈಸೂರು :ಸ್ನಾನ ಮಾಡಲು ಕಪಿಲಾ ನದಿಗಿಳಿದ ಮೂವರು ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಸಂಭವಿಸಿದೆ.ತುಮಕೂರು ಮೂಲದ ಗವಿ ರಂಗ(19), ರಾಕೇಶ್(19) ಹಾಗೂ ಅಪ್ಪು(16) ಮೃತಪಟ್ಟ ದುರ್ದೈವಿಗಳು. ನಂಜನಗೂಡು ತಾಲೂಕಿನ ಹೆಜ್ಜೆಗೆ ಸೇತುವೆ ಬಳಿ ಸ್ನಾನ ಮಾಡಲು ಇಳಿದು ಮೃತಪಟ್ಟಿದ್ದಾರೆ.ಕಪಿಲ ನದಿಯಲ್ಲಿ ಶುಕ್ರವಾರ ಬೆಳಿಗ್ಗೆ ಸ್ನಾನಕ್ಕೆಂದು ಇಳಿದಿದ್ದ ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಐವರು ಗುರುವಾರ ತಡರಾತ್ರಿ ಇಲ್ಲಿನ ನಂಜುಂಡೇಶ್ವರನ ದರ್ಶನಕ್ಕೆ ಬಂದಿದ್ದರು. ಶುಕ್ರವಾರ ಬೆಳಿಗ್ಗೆ ಸ್ನಾನಕ್ಕೆಂದು ನದಿಗೆ ಇಳಿದಿದ್ದಾರೆ. ಇಬ್ಬರು ಈಜಿ ಮೇಲೆ ಬಂದಿದ್ದಾರೆ ಎನ್ನಲಾಗಿದೆ.
ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಶಾಸಕ ದರ್ಶನ್ ಧ್ರುವನಾರಾಯಣ ಸ್ಥಳಕ್ಕೆ ಭೇಟಿ ನೀಡಿದ್ದರು. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2023-07-19 10:15:21 |
ಮಂಗಳೂರು, ಜುಲೈ 19: ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮಹಮ್ಮದ್ ನಶತ್ (21) ಮೃತ ವಿದ್ಯಾರ್ಥಿ. ಯುವಕ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿದ್ದು ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು 11.40ರ ಸುಮಾರಿಗೆ ಘಟನೆ ನಡೆದಿದ್ದು ಮಂಗಳೂರು ಸಂಚಾರಿ ದಕ್ಷಿಣ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಕೇರಳ ಮೂಲದ ವಿದ್ಯಾರ್ಥಿ ಎನ್ನುವ ಮಾಹಿತಿಯಿದೆ. ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
ಅತಿ ವೇಗದ ಚಾಲನೆಯಿಂದಲೇ ಅಪಘಾತ ಆಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.
Posted by Vidyamaana on 2023-10-13 13:03:13 |
ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಪುರ ಗ್ರಾಮದಲ್ಲಿ ನಡೆದಿದೆ.
ಮದರಾ ಬಿ. ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಗೌಡಪ್ಪಗೌಡ ಪಾಟೀಲ್(50) ಎನ್ನುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಗೌಡಪ್ಪಗೌಡ, ಅಫಜಲಪುರ ತಾಲೂಕಿನ ಮದರಿ ಗ್ರಾಮದ ನಿವಾಸಿಯಾಗಿದ್ದು. ಹಳೇ ವೈಷಮ್ಯ ಹಿನ್ನೆಲೆ ಗೌಡಪ್ಪಗೌಡನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.